ಕರಾವಳಿಯಲ್ಲಿ ಭಾರೀ ಮಳೆ: ಮಂಗಳೂರಿನಲ್ಲಿ ಮನೆ ಮೇಲ್ಚಾವಣಿ ಕುಸಿದು ಮೂವರು ಸಾವು

ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ನಡುವೆ ಮಂಗಳೂರಿನ ಕಂಕನಾಡಿಯಲ್ಲಿ ಹೃದಯವಿದ್ರಾವಕ ದುರಂತ ಸಂಭವಿಸಿದೆ. ನಿರಂತರ ಮಳೆಯಿಂದ ಹಳೆಯ ಹಂಚಿನ ಮನೆಯ ಮೇಲ್ಚಾವಣಿ ಕುಸಿದು ಬಿದ್ದ ಪರಿಣಾಮ ಮಹಿಳೆಯೊಬ್ಬರು ಹಾಗೂ ಇಬ್ಬರು ಬಾಲಕಿಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮಂಗಳವಾರ ರಾತ್ರಿ ಆರಂಭವಾದ ಭಾರೀ ಮಳೆ ಬುಧವಾರವೂ ಮುಂದುವರಿದಿದ್ದು, ಇದೇ ವೇಳೆ ಕಂಕನಾಡಿಯಲ್ಲಿದ್ದ ಹಳೆಯ ಮನೆ ಏಕಾಏಕಿ ಕುಸಿದಿದೆ. ಅವಶೇಷಗಳಡಿ ಸಿಲುಕಿದ್ದವರನ್ನು ರಕ್ಷಿಸಲು ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಕಾರ್ಯಾಚರಣೆ ನಡೆಸಿದರು.

ರಕ್ಷಣಾ ಕಾರ್ಯಾಚರಣೆಯಲ್ಲಿ ಅವಶೇಷಗಳಡಿ ಸಿಲುಕಿದ್ದ ಒಬ್ಬ ಪುರುಷ ಹಾಗೂ ಇಬ್ಬರು ಬಾಲಕಿಯರನ್ನು ಜೀವಂತವಾಗಿ ಹೊರತೆಗೆದು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೃತರು ಹಾಗೂ ಗಾಯಾಳುಗಳು ಮೂಲತಃ ಬಿಹಾರ ರಾಜ್ಯದವರಾಗಿದ್ದು, ಕಂಕನಾಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು ಎಂದು ತಿಳಿದುಬಂದಿದೆ.

ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಜೊತೆಗೆ ಗಾಯಾಳುಗಳ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಜಿಲ್ಲಾಡಳಿತವೇ ಭರಿಸಲಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *