2037ರೊಳಗೆ ಕರ್ನಾಟಕ 1 ಟ್ರಿಲಿಯನ್ ಡಾಲರ್ ಆರ್ಥಿಕತೆ: ಡಿ.ಕೆ.ಶಿವಕುಮಾರ್

ಬೆಂಗಳೂರು: 2037ರ ವೇಳೆಗೆ ಕರ್ನಾಟಕವನ್ನು 1 ಟ್ರಿಲಿಯನ್ ಡಾಲರ್ ಆರ್ಥಿಕತೆಯ ರಾಜ್ಯವನ್ನಾಗಿ ರೂಪಿಸುವುದು ಸರ್ಕಾರದ ‘ಮಹಾಸಂಕಲ್ಪ’ವಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು 100 ದಿನ ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ತಮ್ಮ ಮುಂದಿನ ಕಾರ್ಯಯೋಜನೆ ಹಾಗೂ ರಾಜ್ಯದ ಅಭಿವೃದ್ಧಿ ಗುರಿಗಳನ್ನು ಅವರು ಪ್ರಕಟಿಸಿದ್ದಾರೆ. ಬಡತನ ಮತ್ತು ಶಾಲೆಯಿಂದ ಹೊರಗುಳಿಯುವ ಪ್ರಮಾಣವನ್ನು ಶೂನ್ಯಕ್ಕೆ ತರುವುದು, ಅಪೌಷ್ಟಿಕತೆಯನ್ನು ಶೇ.5ಕ್ಕಿಂತ ಕಡಿಮೆಗೊಳಿಸುವುದು ಸರ್ಕಾರದ ಪ್ರಮುಖ ಗುರಿಗಳಾಗಿವೆ ಎಂದು ತಿಳಿಸಿದ್ದಾರೆ.

‘ಮಹಾಸಂಕಲ್ಪ’ ಸಾಧನೆಗಾಗಿ ‘ನವಸಂಕಲ್ಪ’ದಡಿ ಆರೋಗ್ಯ, ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಆದ್ಯತೆ ನೀಡಲಾಗಿದೆ. ಮೇಕೆದಾಟು ಮತ್ತು ಎತ್ತಿನಹೊಳೆ ಯೋಜನೆಗಳಂತಹ ಜಲ ಭದ್ರತಾ ಯೋಜನೆಗಳಿಗೆ ವೇಗ ನೀಡುವ ಮೂಲಕ ರಾಜ್ಯದ ನೀರಿನ ಭದ್ರತೆ ಬಲಪಡಿಸುವ ಉದ್ದೇಶ ಹೊಂದಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.

ಮುಂದಿನ 500 ದಿನಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ₹1.5 ಲಕ್ಷ ಕೋಟಿ ಬಂಡವಾಳ ಹೂಡಿಕೆ ಮಾಡುವ ಗುರಿ ಹೊಂದಲಾಗಿದ್ದು, ₹3 ಲಕ್ಷ ಕೋಟಿ ಹೊಸ ಹೂಡಿಕೆಯನ್ನು ರಾಜ್ಯಕ್ಕೆ ಆಕರ್ಷಿಸುವ ಯೋಜನೆ ರೂಪಿಸಲಾಗಿದೆ ಎಂದಿದ್ದಾರೆ.

ರಾಜ್ಯದಲ್ಲಿ 5 ಹೊಸ ಮಹಾನಗರಗಳನ್ನು ಅಭಿವೃದ್ಧಿಪಡಿಸುವ ಗುರಿಯನ್ನೂ ಸರ್ಕಾರ ಹೊಂದಿದೆ. 1 ಲಕ್ಷ ಸರ್ಕಾರಿ ಉದ್ಯೋಗ ಹಾಗೂ 5 ಲಕ್ಷ ಖಾಸಗಿ ಉದ್ಯೋಗ ಸೃಷ್ಟಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ. ನಿರಾಶ್ರಿತರಿಗೆ 5 ಲಕ್ಷ ನಿವೇಶನ ಹಂಚಿಕೆ ಮಾಡುವ ಗುರಿಯನ್ನೂ ಹೊಂದಲಾಗಿದೆ ಎಂದು ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರು ನಗರದಲ್ಲಿ 5 ಹೊಸ ಲಾಲ್‌ಬಾಗ್ ಮಾದರಿಯ ಉದ್ಯಾನವನಗಳನ್ನು ನಿರ್ಮಿಸುವುದು ಹಾಗೂ 7 ಕೆರೆಗಳನ್ನು ಪುನರುಜ್ಜೀವನಗೊಳಿಸುವ ಯೋಜನೆಗೂ ಆದ್ಯತೆ ನೀಡಲಾಗಿದೆ.

ಆರ್ಥಿಕವಾಗಿ ಸಬಲ, ಸಾಮಾಜಿಕವಾಗಿ ಸಮಾನ ಹಾಗೂ ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕವನ್ನು ನಿರ್ಮಿಸುವ ಮೂಲಕ ನಾಳಿನ ಭಾರತದ ಅಭಿವೃದ್ಧಿಗೆ ರಾಜ್ಯವನ್ನು ಮಾದರಿಯಾಗಿಸುವುದು ಈ ‘ಮಹಾಸಂಕಲ್ಪ’ದ ಉದ್ದೇಶವಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *