ಮಹಿಳೆಯರಿಗಷ್ಟೇ ಅಲ್ಲ, ವಿದ್ಯಾರ್ಥಿಗಳಿಗೂ ಉಚಿತ ಬಸ್ ಪ್ರಯಾಣ, ಡಿಕೆಶಿ ಸಂಪುಟದ ಮೊದಲ ಸಭೆಯಲ್ಲೇ ಘೋಷಣೆ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲೇ ಹಲವು ಜನಪರ ಹಾಗೂ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಲಾಗಿದ್ದು, ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್‌ನಿಂದ ಹಿಡಿದು ರಸ್ತೆ ಅಭಿವೃದ್ಧಿಗೆ ₹2,000 ಕೋಟಿ ಅನುದಾನ ಘೋಷಿಸುವವರೆಗೆ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.

ವಿಧಾನಸೌಧದಲ್ಲಿ ನಡೆದ ಮೊದಲ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜ್ಯದಲ್ಲಿ ಹೊಸ ಆಡಳಿತದ ದಿಕ್ಕು ನಿರ್ಧರಿಸುವ ಉದ್ದೇಶದಿಂದ ಹಲವು ಪ್ರಮುಖ ತೀರ್ಮಾನಗಳನ್ನು ಕೈಗೊಂಡಿರುವುದಾಗಿ ತಿಳಿಸಿದರು.

ರಾಜ್ಯದ ಎಲ್ಲಾ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲು ಸರ್ಕಾರ ತೀರ್ಮಾನಿಸಿದೆ. ಈಗಾಗಲೇ ಶೈಕ್ಷಣಿಕ ವರ್ಷ ಆರಂಭವಾಗಿರುವ ಹಿನ್ನೆಲೆಯಲ್ಲಿ ಅರ್ಜಿ ವಿತರಣೆ ಹಾಗೂ ಅನುಷ್ಠಾನದ ಕುರಿತು ಸಾರಿಗೆ ಇಲಾಖೆ ಶೀಘ್ರದಲ್ಲೇ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಹೇಳಿದರು.

ನಗರ ಹಾಗೂ ಪಟ್ಟಣ ಪ್ರದೇಶಗಳ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಿರುವ ಸರ್ಕಾರ, ಈಗಾಗಲೇ ನಡೆಯುತ್ತಿರುವ ಕಾಮಗಾರಿಗಳನ್ನು ಹೊರತುಪಡಿಸಿ ರಸ್ತೆ ಅಭಿವೃದ್ಧಿಗೆ ವಿಶೇಷವಾಗಿ ₹2,000 ಕೋಟಿ ಮೀಸಲಿಡಲು ನಿರ್ಧರಿಸಿದೆ. ಬೆಂಗಳೂರು ಮಹಾನಗರ ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯ ರಸ್ತೆಗಳ ಸುಧಾರಣೆಗೆ ಈ ಅನುದಾನ ಬಳಸಲಾಗುತ್ತದೆ.

2500 ಚದರ ಅಡಿವರೆಗಿನ ನಿವೇಶನಗಳಲ್ಲಿ ನಿರ್ಮಿಸಲಾದ ವಸತಿ ಕಟ್ಟಡಗಳಿಗೆ ಒಮ್ಮೆ ಮಾತ್ರ ಆಕ್ಯುಪೆನ್ಸಿ ಪ್ರಮಾಣಪತ್ರ (ಒಸಿ) ಮತ್ತು ಕಂಪ್ಲೀಷನ್ ಪ್ರಮಾಣಪತ್ರ (ಸಿಸಿ) ಪಡೆಯುವ ನಿಯಮದಿಂದ ವಿನಾಯಿತಿ ನೀಡಲು ಸರ್ಕಾರ ನಿರ್ಧರಿಸಿದೆ. ಇದರಿಂದ ಸಣ್ಣ ಮನೆಗಳ ಮಾಲೀಕರಿಗೆ ಹೆಚ್ಚಿನ ಅನುಕೂಲವಾಗಲಿದೆ.

ಯುವಕರಲ್ಲಿ ನಾಯಕತ್ವ ಹಾಗೂ ಸಾಮಾಜಿಕ ಸೇವಾ ಮನೋಭಾವ ಬೆಳೆಸುವ ಉದ್ದೇಶದಿಂದ ರಾಜ್ಯದ ಪ್ರತಿಯೊಂದು ಗ್ರಾಮ ಪಂಚಾಯಿತಿಯಲ್ಲೂ ‘ಭಾರತ್ ಜೋಡೋ ಯುವಕ ಸಂಘ’ ಸ್ಥಾಪಿಸಲು ಸರ್ಕಾರ ಮುಂದಾಗಿದೆ. ರಾಜ್ಯಾದ್ಯಂತ ಸುಮಾರು 10 ಸಾವಿರ ಸಂಘಗಳನ್ನು ರಚಿಸುವ ಗುರಿ ಹೊಂದಿದ್ದು, ಪ್ರತಿ ಸಂಘಕ್ಕೆ ₹10 ಲಕ್ಷ ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಖಾಸಗಿ ವಲಯದಲ್ಲಿ ಉದ್ಯೋಗ ಬಯಸುವ ಯುವಕರು ಹಾಗೂ ಉದ್ಯೋಗಾವಕಾಶ ಒದಗಿಸುವ ಕಂಪನಿಗಳ ನಡುವೆ ಸಂಪರ್ಕ ಕಲ್ಪಿಸಲು ‘ಯುವ ಉದ್ಯೋಗ ಸೇತು’ ವ್ಯವಸ್ಥೆ ಜಾರಿಗೆ ತರಲಾಗುತ್ತದೆ. ಈ ಕೇಂದ್ರದ ಮೂಲಕ ತರಬೇತಿ, ಕೌಶಲ್ಯ ಅಭಿವೃದ್ಧಿ ಹಾಗೂ ಉದ್ಯೋಗ ಆಯ್ಕೆ ಪ್ರಕ್ರಿಯೆಗಳನ್ನು ಆನ್‌ಲೈನ್ ಮೂಲಕ ನಿರ್ವಹಿಸಲಾಗುವುದು.

ಸರ್ಕಾರಿ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಉದ್ದೇಶದಿಂದ 56 ಸಾವಿರ ಹುದ್ದೆಗಳನ್ನು ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರ ನಿರ್ಧರಿಸಿದೆ. ಜೊತೆಗೆ ಖಾಸಗಿ ವಲಯದಲ್ಲೂ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸುವ ಕುರಿತು ಕಂಪನಿಗಳೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.

ಇದುವರೆಗೆ ಬೆಂಗಳೂರಿಗೆ ಮಾತ್ರ ಸೀಮಿತವಾಗಿದ್ದ ಬಿ-ಖಾತೆ ಆಸ್ತಿಗಳನ್ನು ಎ-ಖಾತೆಗೆ ಪರಿವರ್ತಿಸುವ ಯೋಜನೆಯನ್ನು ರಾಜ್ಯದ ಎಲ್ಲ ನಗರ ಪ್ರದೇಶಗಳಿಗೆ ವಿಸ್ತರಿಸಲು ಸರ್ಕಾರ ತೀರ್ಮಾನಿಸಿದೆ. ಇದರಿಂದ ಸಾವಿರಾರು ಆಸ್ತಿ ಮಾಲೀಕರಿಗೆ ದಾಖಲೆಗಳ ನಿಯಮಿತೀಕರಣದಲ್ಲಿ ಅನುಕೂಲವಾಗಲಿದೆ.

ಸರ್ಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲೇ ಶಿಕ್ಷಣ, ಉದ್ಯೋಗ, ಮೂಲಸೌಕರ್ಯ ಹಾಗೂ ಯುವಜನರ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಘೋಷಣೆಗಳನ್ನು ಮಾಡಿರುವುದು ಗಮನ ಸೆಳೆದಿದೆ.

Leave a Reply

Your email address will not be published. Required fields are marked *