‘ತುಳು ಭಾಷೆಗೆ ಮಾನ್ಯತೆ, ಮೂಲಸೌಕರ್ಯ ಮತ್ತು ಪ್ರವಾಸೋದ್ಯಮಕ್ಕೆ ಒತ್ತು’; ರಾಜ್ಯ ಸಂಪುಟ ನಿರ್ಧಾರಗಳನ್ನು ‘ಕರಾವಳಿ ಜನರ ಬದುಕಿಗೆ ನವೋದಯ’ ಎಂದ ಪದ್ಮರಾಜ್ ಪೂಜಾರಿ

ಮಂಗಳೂರು: ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಭಾಗದ ಅಭಿವೃದ್ಧಿ ಹಾಗೂ ತುಳು ಭಾಷೆಯ ಮಾನ್ಯತೆಗೆ ಸಂಬಂಧಿಸಿದಂತೆ ಕೈಗೊಂಡ ನಿರ್ಧಾರಗಳಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂತಸ ವ್ಯಕ್ತಪಡಿಸಿದ್ದಾರೆ.

ಕರಾವಳಿಯ ಜನರ ಭಾವನೆಗಳನ್ನು ರಾಜಕೀಯವಾಗಿ ಬಳಸಿಕೊಳ್ಳುವುದಕ್ಕಿಂತ ಅವರ ಬದುಕು ಸುಧಾರಿಸುವ ನೈಜ ಅಭಿವೃದ್ಧಿಗೆ ಆದ್ಯತೆ ನೀಡಬೇಕಿತ್ತು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಂಪುಟ ಸಭೆಯ ನಿರ್ಧಾರಗಳು ಕರಾವಳಿ ಅಭಿವೃದ್ಧಿಗೆ ಹೊಸ ದಿಕ್ಕು ನೀಡಿವೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ತುಳು ಭಾಷೆಗೆ ಗೌರವ

ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆಯ ಮಾನ್ಯತೆ ನೀಡಿರುವುದು ಕರಾವಳಿಯ ಜನರಿಗೆ ಹೆಮ್ಮೆಯ ಸಂಗತಿ. ಸುಮಾರು ಎರಡೂವರೆ ಸಾವಿರ ವರ್ಷಗಳ ಇತಿಹಾಸ, ಶ್ರೀಮಂತ ಸಾಹಿತ್ಯ, ಯಕ್ಷಗಾನ ಹಾಗೂ ಜಾನಪದ ಪರಂಪರೆ ಹೊಂದಿರುವ ತುಳು ಭಾಷೆಗೆ ದೊರೆತ ಗೌರವವು ತುಳುನಾಡಿನ ಹಿರಿಯರ ದೀರ್ಘಕಾಲದ ಕನಸನ್ನು ನನಸು ಮಾಡಿದಂತಾಗಿದೆ ಎಂದು ಪೂಜಾರಿ ಹೇಳಿದ್ದಾರೆ.

ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ

ಸಾರಿಗೆ, ಸಂಪರ್ಕ ಮತ್ತು ಮೂಲಸೌಕರ್ಯ ಅಭಿವೃದ್ಧಿಗೂ ಸಂಪುಟ ಸಭೆ ಒತ್ತು ನೀಡಿದೆ. ರಾಷ್ಟ್ರೀಯ ಹೆದ್ದಾರಿ ಆಧುನೀಕರಣ, ಗ್ರಾಮೀಣ ರಸ್ತೆಗಳು ಹಾಗೂ ಸೇತುವೆಗಳ ಅಭಿವೃದ್ಧಿ, ಬಂದರುಗಳ ವಿಸ್ತರಣೆ ಮತ್ತು ಕುಡಿಯುವ ನೀರಿನ ಯೋಜನೆಗಳಿಗೆ ಆದ್ಯತೆ ನೀಡಿರುವುದು ಜನಜೀವನಕ್ಕೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.

ಪ್ರವಾಸೋದ್ಯಮಕ್ಕೆ ಉತ್ತೇಜನ

ಕರಾವಳಿಯ ಪ್ರವಾಸೋದ್ಯಮ ಸಾಮರ್ಥ್ಯವನ್ನು ಬಳಸಿಕೊಳ್ಳಲು ರೂಪಿಸಿರುವ ಯೋಜನೆಗಳು ಸ್ವಾಗತಾರ್ಹ. ಬೀಚ್ ಟೂರಿಸಂ, ಜಲಕ್ರೀಡೆ, ಬ್ಯಾಕ್‌ವಾಟರ್, ಪರಿಸರ ಪ್ರವಾಸೋದ್ಯಮ ಹಾಗೂ ಧಾರ್ಮಿಕ ಪ್ರವಾಸೋದ್ಯಮಕ್ಕೆ ಒತ್ತು ನೀಡುವುದರಿಂದ ಸ್ಥಳೀಯ ಆರ್ಥಿಕತೆಗೆ ಉತ್ತೇಜನ ದೊರೆಯಲಿದೆ ಎಂದಿದ್ದಾರೆ.

ಐಟಿ, ಸಮುದ್ರೋತ್ಪನ್ನ, ಪ್ರವಾಸೋದ್ಯಮ ಮತ್ತು ಬಂದರು ಆಧಾರಿತ ಕೈಗಾರಿಕೆಗಳ ಮೂಲಕ ಸ್ಥಳೀಯ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಿರುವುದು ಯುವಜನರಿಗೆ ಹೊಸ ಅವಕಾಶಗಳನ್ನು ಕಲ್ಪಿಸಲಿದೆ. ಧಾರ್ಮಿಕ ಕ್ಷೇತ್ರಗಳು, ದೈವಸ್ಥಾನಗಳು ಹಾಗೂ ಪುಣ್ಯಸ್ಥಳಗಳ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಿರುವುದೂ ಸ್ವಾಗತಾರ್ಹ ಎಂದು ಹೇಳಿದ್ದಾರೆ.

ತುಳು ಭಾಷೆಯ ಗೌರವ, ಯುವಜನರ ಉದ್ಯೋಗ, ಮೂಲಸೌಕರ್ಯ ಅಭಿವೃದ್ಧಿ ಮತ್ತು ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಸಂಪುಟ ನಿರ್ಧಾರಗಳು ಕರಾವಳಿ ಜನರ ಬದುಕಿನಲ್ಲಿ ನವೋದಯದ ಅಧ್ಯಾಯಕ್ಕೆ ನಾಂದಿ ಹಾಡಿವೆ ಎಂದು ಪದ್ಮರಾಜ್ ಪೂಜಾರಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *